
ಶಿಶಿಲ: ಶಿಶಿಲದ ಸರ್ಕಾರಿ ಪ್ರಾಥಮಿಕ ಶಾಲೆಯ 70 ವರ್ಷಗಳ ಇತಿಹಾಸವುಳ್ಳ ಹಳೆ ಕಟ್ಟಡ ಈಗ ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ, ನೂತನ ಕಟ್ಟಡದ ಕಾಮಗಾರಿ ವೇಗ ಪಡೆದು ಮುಂದುವರೆದಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡ ಉಜಿರೆಯ ವತಿಯಿಂದ ಶಾಲೆಯಲ್ಲಿ ಸಮಾಲೋಚನಾ ಸಭೆ ನಡೆಯಿತು.
ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಉತ್ತಮ ಬೌಧ್ಧಿಕ ಹಾಗೂ ಭೌತಿಕ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ನಡೆದ ಈ ಸಭೆಗೆ ಸ್ಥಳೀಯ ವಿದ್ಯಾಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡರು.
ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮೋಹನ್ ಗೌಡ ವಹಿಸಿದ್ದರು. ರೋಟರಿ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷ ಪೂರನ್ ವರ್ಮ, ಕಾರ್ಯದರ್ಶಿ ಸಂದೇಶ್, ಸದಸ್ಯ ಅಬೂಬಕ್ಕರ್, ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್, ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ.ಪಂ.ಅಧ್ಯಕ್ಷ ಸುದೀನ್ ಡಿ., ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಸ್ವಾಗತಿಸಿದರು. ರಾಘವೇಂದ್ರ ನಾಯಕ್ ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ನಡೆಸಿದರು. ಶಾಲಾ ಮುಖ್ಯಶಿಕ್ಷಕಿ ರತ್ನ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕಿ ಆಶಾ ವಂದಿಸಿದರು.
ಸಭೆಯಲ್ಲಿ ಶಾಲಾ ಮಕ್ಕಳ ಪೋಷಕರು, ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಕಟ್ಟಡ ಸಮಿತಿ ಪದಾಧಿಕಾರಿಗಳು, ಗ್ರಾ.ಪಂ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು ಸೇರಿದಂತೆ ಹಲವಾರು ಮಂದಿ ಹಾಜರಿದ್ದರು.










