

ನೆಲ್ಯಾಡಿ: ಗೋಳಿತ್ತಟ್ಟು ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಗೋಪಾಲ ಗೌಡ ಅವರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳು ದೇಶಭಕ್ತಿಯ ನಾದದೊಂದಿಗೆ ಗೋಳಿತ್ತಟ್ಟು ಪೇಟೆವರೆಗೆ ಪಥಸಂಚಲನ ನಡೆಸಿದರು. ಈ ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸ್ಥಳೀಯರು ಉತ್ಸಾಹದಿಂದ ಪಾಲ್ಗೊಂಡಿದ್ದು, ಊರಿನ ಬೀದಿಗಳು ದೇಶಭಕ್ತಿಯ ಘೋಷಣೆಗಳಿಂದ ಮೊಳಗಿದವು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಪ್ರೇಮದ ಕವನ ಪಠಣ, ನೃತ್ಯ, ನಾಟಕ, ದೇಶಭಕ್ತಿಗೀತೆಗಳ ಮೂಲಕ ಸಾಂಸ್ಕೃತಿಕ ವೈಭವವನ್ನು ಮೆರೆದರು. ಮಕ್ಕಳ ಕಲಾತ್ಮಕ ಪ್ರತಿಭೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭಕ್ಕೆ ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಮತ್ತು ಸದಸ್ಯರು, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಎಸ್.ಡಿ.ಎಂ.ಸಿ. ಸದಸ್ಯರು, ಪೋಷಕರು, ಶಿಕ್ಷಣ ಪ್ರೇಮಿಗಳು, ಶಿಕ್ಷಕ ವೃಂದ ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.











