

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಲ್ಪವೃಕ್ಷ ಸಹಕಾರಿ ಸೌಧದಲ್ಲಿ ನೂತನವಾಗಿ ಅಳವಡಿಸಿದ ಲಿಫ್ಟ್ ಉದ್ಘಾಟನೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೆ.11ರಂದು ಜರುಗಿತು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರೂ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಲಿಫ್ಟ್ ಉದ್ಘಾಟಿಸಿ ಮಾತನಾಡಿದ ಅವರು – ಜಿಲ್ಲೆಯ ಗಡಿಭಾಗದಲ್ಲಿದ್ದರೂ ನೆಲ್ಯಾಡಿ ಪಾಕೃಪಸಂ ಉತ್ತಮ ಪ್ರಗತಿ ಸಾಧಿಸುತ್ತಿದ್ದು, ಶೇ.100 ಸಾಲ ವಸೂಲಾತಿ ಸಾಧಿಸಿರುವ ಜಿಲ್ಲೆಯ ಕೆಲವೇ ಸಂಘಗಳಲ್ಲಿ ಇದು ಒಂದು. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಸತತವಾಗಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಪಡೆದುಕೊಳ್ಳುತ್ತಿರುವುದು ಹೆಮ್ಮೆಗುರಿಯ ವಿಷಯ. ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಲಿಫ್ಟ್ ಅಳವಡಿಸಲಾಗಿದೆ. ಸದಸ್ಯರ ಅನುಕೂಲಕ್ಕಾಗಿ ಇದು ಮಹತ್ವದ ಹೆಜ್ಜೆ. ಇದಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದಲೂ ಅನುದಾನ ಕೊಡಿಸುವ ಬಗ್ಗೆ ಬ್ಯಾಂಕ್ನ ಅಧ್ಯಕ್ಷರ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದರು.
ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಮುರಳೀಧರ ವೈ.ಕೆ. ಉದ್ಘಾಟಿಸಿ ಮಾತನಾಡಿ, ಸಹಕಾರ ಸಂಘವು ಲಾಭಾಂಶವನ್ನು ಸಮಾಜೋಪಯೋಗಿ ಕಾರ್ಯಗಳಿಗೆ ಬಳಸುತ್ತಿರುವುದು ಶ್ಲಾಘನೀಯ. ಗ್ರಾಮೀಣ ಜನರು ಆರೋಗ್ಯ ತಪಾಸಣೆಗೆ ಮುಂದೆ ಬಂದು ತಡೆಯಬಹುದಾದ ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರ ಆರೋಗ್ಯ ರಕ್ಷಣೆ ಸಂಘದ ಪ್ರಮುಖ ಗುರಿ. ಅದಕ್ಕಾಗಿ ಈ ಶಿಬಿರ ಆಯೋಜಿಸಲಾಗಿದೆ. ಕಳೆದ ಮಹಾಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಲಿಫ್ಟ್ ಅಳವಡಿಸಿದ್ದೇವೆ ಎಂದರು.
ಸಂಘದ ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ನಿರ್ದೇಶಕರು ಜಿನ್ನಪ್ಪ ಗೌಡ, ಸರ್ವೋತ್ತಮ ಗೌಡ, ಜನಾರ್ದನ ಗೌಡ ಮುರಿಯೇಲು, ಸುಧಾಕರ ಬಿ., ಉಷಾ ಅಂಚನ್, ಶೇಷಮ್ಮ, ಹರೀಶ್ ಎ., ಬಾಬು ನಾಯ್ಕ್, ಭಾಸ್ಕರ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಂ.ದಯಾಕರ ರೈ, ಸಿಬ್ಬಂದಿಗಳು ಉಪಸ್ಥಿತರಿದ್ದರು. ದಯಾಕರ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ಜಯಾನಂದ ಬಂಟ್ರಿಯಾಲ್ ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ:
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕರೂ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ನ ಅಧ್ಯಕ್ಷರೂ ಆದ ಶಶಿಕುಮಾರ್ ರೈ ಬಾಲ್ಯೊಟ್ಟು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಮುರಳೀಧರ ವೈ.ಕೆ., ಹಾಗೂ ಲಿಫ್ಟ್ ನಿರ್ವಹಣೆ ಮಾಡಿದ ನವೀನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಉಚಿತ ಆರೋಗ್ಯ ತಪಾಸಣೆ;
ಎ.ಜೆ.ವೈದ್ಯಕೀಯ ಆಸ್ಪತ್ರೆ ಮಂಗಳೂರು ಮತ್ತು ಅಶ್ವಿನಿ ಆಸ್ಪತ್ರೆ ನೆಲ್ಯಾಡಿಯ ತಜ್ಞ ವೈದ್ಯರ ತಂಡ ಸಾಮಾನ್ಯ ವೈದ್ಯಕೀಯ, ಎಲುಬು-ಕೀಲು, ಕಣ್ಣು, ಕಿವಿ-ಮೂಗು-ಗಂಟಲು, ಹೃದಯ, ಚರ್ಮ, ಮೂತ್ರಕೋಶ, ಮಕ್ಕಳ ತಪಾಸಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1.30ರವರೆಗೆ ಉಚಿತ ತಪಾಸಣೆ ನಡೆಸಿತು.






