ಶಿರಾಡಿ ಘಾಟ್‌ನಲ್ಲಿ ಭೀಕರ ಅಪಘಾತ — 80 ಅಡಿ ಆಳಕ್ಕೆ ಉರುಳಿದ ಕಾರು, ನಾಲ್ವರು ಪ್ರಾಣಾಪಾಯದಿಂದ ಪಾರು

ಶೇರ್ ಮಾಡಿ

ನೆಲ್ಯಾಡಿ:ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ರಸ್ತೆಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು 80 ಅಡಿ ಆಳದ ಪ್ರಪಾತಕ್ಕೆ ಉರುಳಿ ಕೆಂಪು ಹೊಳೆಗೆ ಬಿದ್ದ ಘಟನೆ ಶುಕ್ರವಾರ ನಡೆದಿದೆ.

ಕಾರಿನಲ್ಲಿ ಶಿವಮೊಗ್ಗ ಮೂಲದ ಗೋವಿಂದ ನಾಯ್ಕ್ ಎಂಬವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ, ಗೋವಿಂದ ನಾಯ್ಕ್ ಅವರ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ತಕ್ಷಣವೇ ಅಂಬುಲೆನ್ಸ್ ಮೂಲಕ ಸಕಲೇಶಪುರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದ ಮೂವರು ಗೋವಿಂದ ನಾಯ್ಕ್ ಹಾಗೂ ಅವರ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೋವಿಂದ ನಾಯ್ಕ್ ತಮ್ಮ ಪುತ್ರ ಅಕ್ಷಿತ್ ಅವರನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನವೋದಯ ಶಾಲೆಗೆ ಬಿಡಲು ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದರು. ಆದರೆ ಮಾರನಹಳ್ಳಿ ಬಳಿ ತಡೆಗೋಡೆಯಿಲ್ಲದ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ಕೆಂಪು ಹೊಳೆಗೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ.

ಅಪಘಾತದ ಶಬ್ದ ಕೇಳಿ ಸ್ಥಳೀಯರು ಹಾಗೂ ಇತರ ವಾಹನ ಸವಾರರು ಧಾವಿಸಿ, ತಕ್ಷಣ ರಕ್ಷಣಾ ಕಾರ್ಯ ನಡೆಸಿ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಕಾರು ಸಂಪೂರ್ಣವಾಗಿ ಹಾನಿಗೊಳಗಾದರೂ,ಪ್ರಾಣಪಾಯದಿಂದ ಪಾರಾಗಿದ್ದಾರೆ.

  •  

Leave a Reply

error: Content is protected !!