





ಕೊಕ್ಕಡ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಹಿಂಸಾತ್ಮಕವಾಗಿ ಕೋಳಿ ಅಂಕ (ಜೂಜಾಟ) ನಡೆಸುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಧರ್ಮಸ್ಥಳ ಠಾಣಾ ಪೊಲೀಸರು ದಾಳಿ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮಾ.27ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕಿನ ಕಳೆಂಜ ಮುರದಮೇಲು ಪ್ರದೇಶದಲ್ಲಿ ಅಕ್ರಮ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದಲ್ಲಿ ಧರ್ಮಸ್ಥಳ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದರು. ಈ ವೇಳೆ ಆರೋಪಿಗಳಾದ ಪ್ರಶಾಂತ್, ಶಶಿಕುಮಾರ್, ಹೊನ್ನಪ್ಪ ಗೌಡ ಹಾಗೂ ಜನಾರ್ಧನಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆರೋಪಿಗಳಿಂದ ಜೂಜಾಟಕ್ಕೆ ಬಳಸುತ್ತಿದ್ದ ನಗದು ರೂ. 2,250/- , ಕೋಳಿ ಅಂಕಕ್ಕೆ ಬಳಸುವ ಬಾಳು (ಸಣ್ಣ ಕತ್ತಿ), 14 ಅಂಕದ ಕೋಳಿಗಳು ಸೇರಿದಂತೆ ಇತರೆ ಸಂಬಂಧಿತ ವಸ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 22/2026 ರಂತೆ ಪ್ರಕರಣ ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112 ಹಾಗೂ ಕೆಪಿಎಕ್ಟ್ 87 ಅಡಿ, ಜೊತೆಗೆ ಪ್ರಿವೆನ್ಷನ್ ಆಫ್ ಅನಿಮಲ್ಸ್ ಕ್ರೂರಟಿ ಆಕ್ಟ್ 1960ರ ಕಲಂ 11(1)(m)(ii), 11(1)(n) ಅನ್ವಯ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದ ತಂಡ ದಾಳಿ ಕಾರ್ಯಾಚರಣೆ ಭಾಗವಹಿಸಿದರು.





