





ನೆಲ್ಯಾಡಿ: ಪೆರಿಯಶಾಂತಿ- ಇಚಿಲಂಪಾಡಿ ರಸ್ತೆಯ ಮಧ್ಯೆ ಕಾಡಿನೊಳಗೆ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತರನ್ನು ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್.ಸಜೀವ(46) ಎಂದು ಗುರುತಿಸಲಾಗಿದೆ.
ಶನಿವಾರ ಮನೆಯಿಂದ ಬೈಕ್ನಲ್ಲಿ ಹೊರಟಿದ್ದ ಅವರು ಸಂಜೆಯಾದರೂ ಮನೆಗೆ ವಾಪಸ್ ಆಗದೇ ಇದ್ದ ಹಿನ್ನೆಲೆಯಲ್ಲಿ ಕುಟುಂಬದವರು ಆತಂಕಗೊಂಡು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರು.
ಭಾನುವಾರ ಬೆಳಗ್ಗೆ ಪೆರಿಯಶಾಂತಿಯಿಂದ ಇಚಿಲಂಪಾಡಿಗೆ ತೆರಳುವ ರಸ್ತೆಯ ಬದಿಯಲ್ಲಿ ಅವರ ಬೈಕ್ ಪತ್ತೆಯಾಗಿದ್ದು, ಇದರಿಂದ ಸಂಶಯಗೊಂಡ ಕುಟುಂಬಸ್ಥರು ಸುತ್ತಮುತ್ತ ಶೋಧ ನಡೆಸಿದರು. ನಂತರ ಕಾಡಿನ ಮಧ್ಯೆ ಮರದ ಬುಡದಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.
ಸ್ಥಳದಲ್ಲಿ ಮದ್ಯದ ಬಾಟಲಿಗಳು ಬಿದ್ದಿರುವುದು ಕಂಡುಬಂದಿದ್ದು, ಅವರು ಮೊದಲು ಮದ್ಯ ಸೇವಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಮೇಲ್ನೋಟಕ್ಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.




