





ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.
ಬಳಂಜ ಗ್ರಾಮದ ಕಾಪಿನಡ್ಕ ನಿವಾಸಿ ಜಯಾನಂದ (57) ಮೃತ ದುರ್ದೈವಿ. ಇವರು ಬೆಳಾಲು ಗ್ರಾಮದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಸ್ಥಳೀಯ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಅವರು ಬೆಳಾಲು ಪೇಟೆಯಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತ ಜಯಾನಂದ ಮೃತರಿಗೆ ಮೂವರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ಪತ್ನಿ 4 ವರ್ಷಗಳ ಹಿಂದೆ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹವನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಯಶೋಧರ ಬೆಳಾಲು ಹಾಗೂ ಧನೇಶ್ ಧನ್ವಿ ಅವರು ಸಹಕರಿಸಿದರು.



