










ವಿಟ್ಲ: ನಾಗರಹಾವು ಕಚ್ಚಿದ ಪರಿಣಾಮ ಆಟೋ ರಿಕ್ಷಾ ಚಾಲಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಸೆರ್ಕಳ ಕದ್ಕಾರ್ನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಸೆರ್ಕಳ ಕದ್ಕಾರು ನಿವಾಸಿ ಸುಲೈಮಾನ್ ಅವರ ಪುತ್ರ ಹಾಗೂ ಆಟೋ ರಿಕ್ಷಾ ಚಾಲಕರಾದ ಹಸೈನಾರ್ (50) ಎಂದು ಗುರುತಿಸಲಾಗಿದೆ.
ಗುರುವಾರ ಬೆಳಿಗ್ಗೆ ಹಸೈನಾರ್ ಅವರು ತಮ್ಮ ಮನೆಯ ಬದಿಯಲ್ಲಿ ಇಟ್ಟಿದ್ದ ಹುಲ್ಲು ತೆಗೆಯುವ ಯಂತ್ರವನ್ನು ಕೈಯಿಂದ ಎತ್ತಲು ಮುಂದಾದ ವೇಳೆ, ಯಂತ್ರದ ಅಡಿಯಲ್ಲಿ ಅವಿತುಕೊಂಡಿದ್ದ ನಾಗರಹಾವು ಏಕಾಏಕಿ ಕಚ್ಚಿದೆ. ಹಾವಿನ ಕಡಿತದಿಂದ ಅವರು ತೀವ್ರ ಅಸ್ವಸ್ಥಗೊಂಡಿದ್ದು, ಸ್ಥಳೀಯರು ಕೂಡಲೇ ಕಲ್ಲಡ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಅದರಂತೆ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯೆಯೇ ಹಸೈನಾರ್ ಕೊನೆಯುಸಿರೆಳೆದಿದ್ದಾರೆ.



