









ಕೊಕ್ಕಡ : ನಿರಂತರ ಭಾರೀ ಮಳೆಯ ಪರಿಣಾಮ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹತ್ಯಡ್ಕ ಸಮೀಪದ ಉಚ್ಚಿಕಟ್ಟದಲ್ಲಿ ಸಣ್ಣ ನೀರಾವರಿ ಇಲಾಖೆಯು ನಿರ್ಮಿಸಿರುವ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡ ಪರಿಣಾಮ ನೀರಿನ ಹರಿವಿಗೆ ಅಡ್ಡಿಯುಂಟಾಯಿತು. ಇದರ ಪರಿಣಾಮ ಡ್ಯಾಂನ ನೀರು ಉಚ್ಚಿರಡ್ಕ ಸಂಪರ್ಕ ರಸ್ತೆಯ ಮೇಲೆ ಹರಿದು ರಸ್ತೆ ಸಂಪೂರ್ಣ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿತು.
ಮಾಹಿತಿ ತಿಳಿಯುತ್ತಿದ್ದಂತೆಯೇ ಅರಸಿನಮಕ್ಕಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಹಾಗೂ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುಧೀರ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಬಳಿಕ ಗ್ರಾಮ ಪಂಚಾಯಿತಿ ಸಿಬ್ಬಂದಿ ಕಿರಣ್ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ರಸ್ತೆಯಲ್ಲಿದ್ದ ಅಡಚಣೆಗಳನ್ನು ತೆರವುಗೊಳಿಸಿ, ತುರ್ತು ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಂಡರು. ಇದರಿಂದ ರಸ್ತೆ ಸಾರ್ವಜನಿಕರ ಸಂಚಾರವನ್ನು ಪುನರಾರಂಭಿಸಲು ಸಾಧ್ಯವಾಯಿತು.
ಈ ಕುರಿತು ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ನಿರಂತರ ಮಳೆಯಿಂದ ಡ್ಯಾಂನಲ್ಲಿ ಮರಮುಟ್ಟುಗಳು ಸಿಲುಕಿಕೊಂಡಿದ್ದರಿಂದ ನೀರು ರಸ್ತೆಯ ಮೇಲೆ ಹರಿದು ಸಂಪರ್ಕ ಕಡಿತಗೊಂಡಿತ್ತು. ಸದ್ಯ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾದ ತಕ್ಷಣ ಗ್ರಾಮ ಪಂಚಾಯಿತಿ ವತಿಯಿಂದ ಸಂಪರ್ಕ ರಸ್ತೆಯನ್ನು ಸಂಪೂರ್ಣವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.



