ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾದ ಉದ್ಯಮಿ ಅಶೋಕ್ ಕುಮಾರ್ ರೈ

ಶೇರ್ ಮಾಡಿ

ಪುತ್ತೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದ್ದು, ತೀವ್ರ ಕುತೂಹಲ ಮೂಡಿಸಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉದ್ಯಮಿ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರ ಆಪ್ತರಾಗಿ ಗುರುತಿಸಿಕೊಂಡಿದ್ದ ಅಶೋಕ್ ಕುಮಾರ್ ರೈ ಬಿಜೆಪಿಯಲ್ಲಿದ್ದರು. ಇತ್ತೀಚೆಗಷ್ಟೇ ಅವರು ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು. ಪುತ್ತೂರು ತಾಲೂಕಿನ ಕೋಡಿಂಬಾಡಿ ನಿವಾಸಿಯಾಗಿರುವ ಇವರು ಉದ್ಯಮಿಯಾಗಿದ್ದು, ರೈ ಎಸ್ಟೇಟ್ ಮಾಲಕರಾಗಿದ್ದಾರೆ.

ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ಮೂಲಕ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಇವರು, ಮುಖ್ಯವಾಗಿ ಮನೆ, ರಸ್ತೆ, ಸ್ವ ಉದ್ಯೋಗ ಇನ್ನಿತರ ನಿರ್ಮಾಣ ಕಾರ್ಯಗಳಿಗೆ ನೆರವು ನೀಡುತ್ತಾ ಬಂದವರು.

ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಾಲಯ ಸೇರಿದಂತೆ ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯ ಅವರ ನೇತೃತ್ವದಲ್ಲಿ ನಡೆದಿದೆ. ಕಂಬಳ ಪ್ರಿಯರಾಗಿರುವ ಅಶೋಕ್ ಕುಮಾರ್ ರೈ, ತನ್ನ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ ಉಪ್ಪಿನಂಗಡಿಯಲ್ಲಿ ವಿಜಯ-ವಿಕ್ರಮ ಜೋಡುಕರೆ ಕಂಬಳ ನಡೆಸುತ್ತಿದ್ದಾರೆ.

Leave a Reply

error: Content is protected !!