ನಾಳೆ ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಲೆಕ್ಕದಲ್ಲಿ ಏನೆಲ್ಲಾ ಬಂಪರ್ ಕೊಡುಗೆ?

ಶೇರ್ ಮಾಡಿ

Karnataka budget 2023: ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಲಿರುವ ರಾಜ್ಯ ಬಜೆಟ್‌ ಕುರಿತು ಕುತೂಹಲ ಹೆಚ್ಚಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಜೆಟ್‌ ಮಂಡನೆಗೆ ವೇದಿಕೆ ಸಿದ್ಧಗೊಂಡಿದೆ. ಹಲವು ಗ್ಯಾರಂಟಿ ಯೋಜನೆಗಳನ್ನು ಒಳಗೊಂಡು 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿರಲಿದೆ. 13 ಬಾರಿ ಯಶಸ್ವಿಯಾಗಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್‌ ಮಂಡನೆಗೆ ಎದುರು ನೋಡುತ್ತಿದ್ದಾರೆ. ಕಾಂಗ್ರೆಸ್ ಚುನಾವಣೆಗೂ ಮುನ್ನ ಘೋಷಿಸಿದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆಗಳಿಗೆ ವಾರ್ಷಿಕ ಸರಿಸುಮಾರು 59 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಇದಕ್ಕೆ ಎಲ್ಲಿಂದ ಹಣ ಕ್ರೂಢೀಕರಣಗೊಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಎರಡನೇ ಬಾರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ನಾಳೆ (ಜುಲೈ 7) ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಲಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತ ಮುಗಿದ ಬಳಿಕ ಕಾಂಗ್ರೆಸ್ ಅಧಿಕಾರಕ್ಕೇರಿದ ನಂತರ ಇದು ಮೊದಲ ಬಜೆಟ್‌ ಆಗಿದ್ದು, ಜನರ ನಿರೀಕ್ಷೆಗಳು ಗರಿಗೆದರಿವೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023ರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದರು. ಚುನಾವಣೆ ಹೊಸ್ತಿಲಿನಲ್ಲಿ ಅನೇಕ ಘೋಷಣೆಗಳನ್ನು ಸಹ ಮಾಡಿದ್ದರು. ಹೀಗಾಗಿ ಈ ಯೋಜನೆಗಳನ್ನು ಸರ್ಕಾರ ಉಳಿಸಿಕೊಳ್ಳುತ್ತಾ ಅಥವಾ ಯೋಜನೆಗಳಿಗೆ ಅಂತ್ಯವಾಡುತ್ತಾ ಎಂಬುದು ಸಹ ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನ ಗ್ಯಾರೆಂಟಿಗಳಿಗೆ ಯಾವ ರೀತಿಯಲ್ಲಿ ಹಣ ಸಂಗ್ರಹಿಸಲಾಗುವುದು?
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ಹೊಸ ಜನಪರ ಕಾರ್ಯಗಳಿಗೆ ಯಾವ ರೀತಿಯಲ್ಲಿ ಹಣವನ್ನು ಕ್ರೂಢೀಕರಣಗೊಳಿಸಲಾಗುವುದು ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಗೊಳಿಸುವ ಜೊತೆಗೆ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿರುವ ಪ್ರಮುಖ ಭರವಸೆಗಳನ್ನು ಈಡೇರಿಸಲು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಒತ್ತು ನೀಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ದಾಖಲೆಯ 14ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ
ರಾಜ್ಯದ ಹಣಕಾಸು ಸಚಿವರಾಗಿ ದಾಖಲೆಯ 14ನೇ ಬಜೆಟ್‌ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಬಜೆಟ್‌ನ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಉಚಿತ ಯೋಜನೆಗಳ ಅನುಷ್ಠಾನಕ್ಕೆ ತರಲು ಹಣದ ಕ್ರೂಢೀಕರಣದ ಜತೆಗೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್‌ ಅನ್ನು ಮಂಡಿಸುತ್ತಾರ? ಎಂಬ ನಿರೀಕ್ಷೆಗಳಿವೆ. ಹೀಗಾಗಿ 2023-24ನೇ ಸಾಲಿನ ಬಜೆಟ್‌ ಗಾತ್ರವು 3.25 ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆಯನ್ನು ಅಂದಾಜು ಮಾಡಲಾಗಿದೆ.

ಜೊತೆಗೆ ಈ ಬಜೆಟ್‌ ಅನ್ನು ಮಂಡಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ 14ನೇ ಮುಂಗಡಪತ್ರವನ್ನು ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೂ ಪಾತ್ರರಾಗಲಿದ್ದಾರೆ.

ದೂರದೃಷ್ಟಿಯ ಬಜೆಟ್‌ ಆಗಿರಲಿದೆಯೇ?
ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮುಖ್ಯಮಂತ್ರಿ ಈಗಾಗಲೇ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬಜೆಟ್‌ ಮಂಡನೆಗೆ ಅಂತಿಮ ರೂಪ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಸಹ ಘೋಷಣೆ ಮಾಡುವ ಸಾಧ್ಯತೆಯಿದೆ.

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಕೆ?
ಬಹು ದಿನಗಳ ಬೇಡಿಕೆಯಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವ ದೂರದ ಗುರಿಯೊಂದಿಗೆ ಜನಪ್ರಿಯ ಯೋಜನೆಗಳಿಗೆ ಮುಖ್ಯಮಂತ್ರಿ ಮಣೆ ಹಾಕಬಹುದು. ಜೊತೆಗೆ ಸಿಎಂ ತವರಿಗೂ ಸಹ ಸಿಂಹಪಾಲು ನೀಡುವ ಸಾಧ್ಯತೆಯಿದೆ.

ಯಾವೆಲ್ಲಾ ಕ್ಷೇತ್ರಗಳಿಗೆ ಪ್ರಮುಖ ಆದ್ಯತೆ!
ಶಿಕ್ಷಣ, ಆರೋಗ್ಯ, ನೀರಾವರಿ, ರೈತರಿಗೆ ವಿಶೇಷ ಸೌಲಭ್ಯ, ಮೂಲಭೂತ ಸೌಕರ್ಯ, ಸಂಪನ್ಮೂಲ ಕ್ರೂಢೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಬಜೆಟ್‌ನ ಪ್ರಮುಖ ಹೈಲೈಟ್ಸ್ ಆಗಿರಬಹುದು. ಜೊತೆಗೆ ರಾಜ್ಯದಲ್ಲಿ ಮೈಸೂರು ರಾಜರ ಆಳ್ವಿಕೆಯ ಅವಧಿಯ ಪಾರಂಪರಿಕ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಈ ಕಟ್ಟಡಗಳ ಪುನಶ್ಚೇತನಕ್ಕೆ ಅನುದಾನ ನೀಡುವ ಸಾಧ್ಯತೆಯಿದೆ.

ಬೆಂಗಳೂರಿಗೆ ಏನು ಕೊಡುಗೆ?
ಸಿಲಿಕಾನ್ ಸಿಟಿ ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ. ನಗರದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು, ಸುಗಮ ಸಂಚಾರಕ್ಕೆ ಕೈಗೊಳ್ಳಬೇಕಾದ ಪ್ರಮುಖ ವಿಚಾರಗಳ ಕುರಿತು ಬಜೆಟ್‌ನಲ್ಲಿ ಪ್ರಸ್ತಾವನೆ ಸಲ್ಲಿಸಬಹುದು. ಜೊತೆಗೆ ನಗರದಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎದುರಾಗುವ ಸವಾಲುಗಳನ್ನು ಬಗೆಹರಿಸಲು, ತಗ್ಗು ಪ್ರದೇಶಗಳಲ್ಲಿ ಉಂಟಾಗುವ ಅವಾಂತರಗಳನ್ನು ತಪ್ಪಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವ ಸಾಧ್ಯತೆಯಿದೆ.

7 ನೇ ವೇತನ ಆಯೋಗ ಜಾರಿಗೆ ಬರಲಿದ್ಯಾ?
ರಾಜ್ಯ ಸರ್ಕಾರದ ಸರ್ಕಾರಿ ನೌಕರರಿಗೆ 7 ವೇತನ ಆಯೋದ ಕೆಲಸ ಕಾರ್ಯ ಅಂತಿಮ ಹಂತಕ್ಕೆ ಬಂದಿದ್ದು, ವೇತನ ಆಯೋಗವನ್ನು ಅನುಷ್ಠಾನಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಈಗಾಗಲೇ 17% ಮಧ್ಯಂತರ ಪರಿಹಾರ ಭತ್ಯೆಯನ್ನು ಕೊಡುತ್ತಿದೆ. ಮುಂದುವರಿದ ಭಾಗವಾಗಿ ಅನುದಾನವನ್ನು ಕಾಯ್ದಿರಿಸಬೇಕು ಎಂಬ ಮನವಿ ಕೊಟ್ಟಿದ್ದೇವೆ. ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ಆಯವ್ಯಯದಲ್ಲಿ ಸೇರಿಸಬಹುದು ಎಂಬ ನಿರೀಕ್ಷೆ ಹೊಂದಿದ್ದಾರೆ.

Leave a Reply

error: Content is protected !!