ಇಂದಿನಿಂದ ಗೃಹಲಕ್ಷ್ಮಿ: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಚಾಲನೆ

ಶೇರ್ ಮಾಡಿ

ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದ್ದು, ನೋಂದಾಯಿಸಿಕೊಂಡ 1.9 ಕೋಟಿ ಮಹಿಳೆಯರ ಖಾತೆಗಳಿಗೆ ಏಕಕಾಲಕ್ಕೆ 2 ಸಾವಿರ ರೂ. ಹಣ ವರ್ಗಾವಣೆಯಾಗಲಿದೆ.

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಹಿತ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯ ಜನರನ್ನು ಸೇರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ಆಗಿರುವುದರಿಂದ ಉದ್ಘಾಟನೆಗೆ ಹೆಚ್ಚಿನ ಮಹತ್ವ ಬಂದಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಅವರು ನಾಲ್ಕು ದಿನಗಳಿಂದ ನಗರದಲ್ಲಿಯೇ ಬೀಡುಬಿಟ್ಟು ಕಾರ್ಯಕ್ರಮದ ವ್ಯವಸ್ಥೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ಕೊಡಗು ಜಿಲ್ಲೆಯ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಭಾಗವಹಿಸಲಿದ್ದು, ಎಲ್ಲರಿಗೂ ಕುಡಿಯುವ ನೀರು, ಆಸನದ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಅವರನ್ನು ಕರೆತರಲು 2 ಸಾವಿರ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಫ‌ಲಾನುಭವಿಗಳ ಜತೆ ಸಂವಾದ
ಯೋಜನೆಯ ಆಯ್ದ ಫ‌ಲಾನುಭವಿಗಳನ್ನು ಪಂಚಾಯತ್‌ ಮಟ್ಟದಲ್ಲಿ ಆಯ್ಕೆ ಮಾಡಿ ರಾಷ್ಟ್ರೀಯ ನಾಯಕರ ಜತೆ ನೇರವಾಗಿ ಸಂವಾದ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯೋಜನೆಯ ಫ‌ಲಾನುಭವಿಗಳು ಮನೆಯ ಮುಂದೆ ನಾ ನಾಯಕಿ, ಗೃಹಲಕ್ಷ್ಮಿ ಎಂದು ರಂಗೋಲಿ ಹಾಕುವ ಕಾರ್ಯಕ್ರಮವೂ ಇದೆ.

ಚಾಮುಂಡೇಶ್ವರಿಗೆ ಕಾಣಿಕೆ ಸಮರ್ಪಣೆ
ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ತಲಾ ಎರಡು ಸಾವಿರ ರೂ. ಕಾಣಿಕೆ ಸಮರ್ಪಿಸಿದರು.

ರಾಜ್ಯಾದ್ಯಂತ ನೇರಪ್ರಸಾರ
ರಾಜ್ಯಾದ್ಯಂತ 10,400 ಸ್ಥಳಗಳು, 6 ಸಾವಿರಕ್ಕೂ ಹೆಚ್ಚು ಗ್ರಾ.ಪಂ.ಗಳು, ವಾರ್ಡ್‌ಗಳಲ್ಲಿ ಒಂದು ಕಡೆ, ಬೆಂಗಳೂರಿನ 198 ವಾರ್ಡ್‌ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ.

Leave a Reply

error: Content is protected !!