ಶಕ್ತಿ ಯೋಜನೆ ಬೆನ್ನಲ್ಲೇ ಸಿಹಿಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

ಶೇರ್ ಮಾಡಿ

ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ. ಗಳಿಗೆ ಏರಿಕೆ ಮಾಡಲಾಗಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದ್ದು, ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ರೂ.1 ಕೋಟಿ ನೀಡಲಾಗಿದೆ. ಮುಂದುವರೆದು, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ.

ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ರೂ.3.00 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು ರೂ.3.00 ಲಕ್ಷದಿಂದ ರೂ.10.00 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ರೂ 7.00 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ.

ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ ನೌಕರರ ಮರಣ ಹೊಂದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಸದರಿ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ಗಳಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು 100 ರೂ.ಗಳಿಗೆ ಹೆಚ್ಚಿಸಿ ಪರಿಷ್ಕರಿಸಲಾಗಿದೆ. ಪರಿಷ್ಕೃತ ಆದೇಶವು ದಿನಾಂಕ: 01.11.2023 ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ.

Leave a Reply

error: Content is protected !!