ಡಿ.8ರಿಂದ 12ರವರೆಗೆ; ಧರ್ಮಸ್ಥಳ ಲಕ್ಷದೀಪೋತ್ಸವ

ಶೇರ್ ಮಾಡಿ

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತೀಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿ.8ರಿಂದ 12ರವರೆಗೆ ನಡೆಯಲಿವೆ.

ಡಿ.11ರಂದು ಸೋಮವಾರ ಸಂಜೆ 5 ಗಂಟೆಗೆ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನವನ್ನು ವಿದ್ವಾಂಸ ಗುರುರಾಜ ಕರಜಗಿ ಉದ್ಘಾಟಿಸುವರು. ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸುಪ್ರೀಂ ಕೋರ್ಟ್ ವಕೀಲ ಎಂ.ಆರ್.ವೆಂಕಟೇಶ್, ಬೆಂಗಳೂರಿನ ವಿಭು ಅಕಾಡೆಮಿ ಮುಖ್ಯಸ್ಥ ವಿಜಯಪುರದ ಮಹಮ್ಮದ್ ಗೌಸ್ ಹವಾಲ್ದಾರ ಧಾರ್ಮಿಕ ಉಪನ್ಯಾಸ ನೀಡುವರು.

ರಾತ್ರಿ 8.30ರಿಂದ ಬೆಂಗಳೂರಿನ ಅನುರಾಧಾ ವಿಕ್ರಾಂತ್, ಬಳಗದವರಿಂದ ನೃತ್ಯ ಪ್ರದರ್ಶನವಿದೆ.

ಡಿ.12ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನವನ್ನು ಬೆಂಗಳೂರಿನ ಇಸ್ರೊದ ಅಧ್ಯಕ್ಷ ಎಸ್.ಸೋಮನಾಥ್ ಉದ್ಘಾಟಿಸುವರು. ಬೆಂಗಳೂರಿನ ಗಮಕಿ ಎ.ವಿ.ಪ್ರಸನ್ನ ಅಧ್ಯಕ್ಷತೆ ವಹಿಸುವರು. ಹೊನ್ನಾವರದ ನಿವೃತ್ತ ಉಪನ್ಯಾಸಕ ಶ್ರೀಪಾದ ಶೆಟ್ಟಿ, ಬೆಂಗಳೂರಿನ ರಂಗಕರ್ಮಿ ಪ್ರಕಾಶ್ ಬೆಳವಾಡಿ, ಬಂಟ್ವಾಳದ ಅಜಕ್ಕಳ ಗಿರೀಶ್ ಭಟ್ ಉಪನ್ಯಾಸ ನೀಡುವರು. ರಾತ್ರಿ 8.30ರಿಂದ ಬೆಂಗಳೂರಿನ ಜತಿನ್ ನೃತ್ಯ ಅಕಾಡೆಮಿಯ ವಿದುಷಿ ಅರ್ಚನಾ ಪುಣ್ಯೇಶ್ ಮತ್ತು ಬಳಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಡಿ.8ರಂದು ಶುಕ್ರವಾರ ಬೆಳಿಗ್ಗೆ 10.30ಕ್ಕೆ ಧರ್ಮಸ್ಥಳ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗಾಧಿಕಾರಿ ಗಿರೀಶ್‌ನಂದನ್ ಉದ್ಘಾಟಿಸುವರು. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿ.10ರಂದು ಸಂಜೆ 7ರಿಂದ 10ರ ವರೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಬಳಗದವರಿಂದ ಗಾನ, ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.

ಡಿ.12ರಂದು ರಾತ್ರಿ 12 ಗಂಟೆ ಬಳಿಕ ಲಕ್ಷದೀಪೋತ್ಸವ ನಡೆಯಲಿದೆ.

ಉತ್ಸವಗಳು:
ಡಿ.8ರಂದು ಹೊಸಕಟ್ಟೆ ಉತ್ಸವ, 9ರಂದು ಕೆರೆಕಟ್ಟೆ ಉತ್ಸವ, 10ರಂದು ಲಲಿತೋದ್ಯಾನ ಉತ್ಸವ, 11ರಂದು ಕಂಚಿಮಾರುಕಟ್ಟೆ ಉತ್ಸವ, 12ರಂದು ಗೌರಿಮಾರುಕಟ್ಟೆ ಉತ್ಸವ, ಲಕ್ಷದೀಪೋತ್ಸವ, 13ರಂದು ಸಂಜೆ 7ರಿಂದ ಭಗವಾನ್ ಶ್ರೀಚಂದ್ರನಾಥ ಸ್ವಾಮಿ ಬಸದಿಯ ಆವರಣದಲ್ಲಿ ಸಮವಸರಣ ಪೂಜೆ ನಡೆಯಲಿದೆ.

Leave a Reply

error: Content is protected !!