![](https://i0.wp.com/nesaranewsworld.com/wp-content/uploads/2023/12/1218717-whatsapp-image-2023-12-01-at-63234-pm.jpg?resize=792%2C445&ssl=1)
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಲ್ಲೆ ನಡೆಸಿದ ಘಟನೆ ಬಳ್ಳಮಂಜ ಮಚ್ಚಿನದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್.ಡಿ. ಎಂ.ಸಿ ಅಧ್ಯಕ್ಷ ಹಾಗೂ ಇಬ್ಬರು ಶಿಕ್ಷಕರ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ತಫ್ಸೀರ್ ಹಲ್ಲೆಗೆ ಒಳಗಾದ ಬಾಲಕ. ಎಸ್.ಡಿ.ಎಂ.ಸಿ ಅಧ್ಯಕ್ಷ ಪರಮೇಶ್ ಹಲ್ಲೆ ಮಾಡಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ತಫ್ಸೀರ್ ತನ್ಮ ಸೈಕಲ್ ಅನ್ನು ಇನ್ನೊಬ್ಬ ವಿದ್ಯಾರ್ಥಿಗೆ ಮಾರಾಟ ಮಾಡಿದ್ದ ಎನ್ನಲಾಗಿದ್ದು, ಈ ವಿಚಾರವಾಗಿ ನ.28ರಂದು ಬಾಲಕನನ್ನು ಶಿಕ್ಷಕರ ಕೊಠಡಿಗೆ ಕರೆಸಿದ ಆರೋಪಿ ಪರಮೇಶ್ ವಿದ್ಯಾರ್ಥಿಯ ತಾಯಿಯ ಎದುರಲ್ಲಿಯೇ ಆತನ ಮೇಲೆ ಕೋಲಿನಿಂದ ಹಾಗೂ ಕೈಯಿಂದ ಹಲ್ಲೆ ನಡೆಸಿದ್ದಾನೆ, ಬಾಲಕನ ಎದೆಗೂ ಗುದ್ದಿದ್ದಾನೆ ಎನ್ನಲಾಗಿದ್ದು ಕೋಲಿನಿಂದ ನಡೆಸಿದ ಹಲ್ಲೆಯಿಂದ ಬಾಲಕನ ಕಾಲಿನಲ್ಲಿ ಗಾಯವಾಗಿದೆ. ಹಲ್ಲೆ ನಡೆಸಿದ ಬಳಿಕ ಇದನ್ನು ಯಾರಿಗೂ ಹೇಳುವುದು ಬೇಡ ಹೇಳಿದರೆ ಸೈಕಲ್ ಕಳ್ಳತನ ಮಾಡಿರುವುದಾಗಿ ಕೇಸ್ ಮಾಡಿಸುತ್ತೇನೆ ಎಂದು ಬೆದರಿಕೆಯನ್ನೂ ಪರಮೇಶ್ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ನ.30ರಂದು ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ಈ ವೇಳೆ ಬಾಲಕನ ತಾಯಿ ಹಲ್ಲೆ ಮಾಡಿರುವ ಬಗ್ಗೆ ಸಂಬಂಧಿಕರಿಗೆ ಹೇಳಿದ್ದು, ಆಗಲೇ ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಲಾಗಿದೆ.
ಇದೀಗ ದೂರಿನಂತೆ ಎಸ್.ಡಿ.ಎಂ.ಸಿ ಸಮಿತಿ ಅಧ್ಯಕ್ಷ ಪರಮೇಶ್ ಹಾಗೂ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಹಾಗೂ ಶಿಕ್ಷಕ ರಮೇಶ್ ವಿರುದ್ಧ ಪೂಂಜಾಲಕಟ್ಟೆ ಠಾಣೆಯಲ್ಲಿ ಕಲಂ 323, 324,506,114 ಹಾಗೂ ಬಾಲನ್ಯಾಯ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಭೇಟಿ;
ಘಟನೆಯ ಬಗ್ಗೆ ಮಾಹಿತಿ ತಿಳಿದು ಡಿ.ಡಿ.ಪಿ.ಐ ಬಿ. ಆರ್ ನಾಯಕ್ ಹಾಗೂ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಾಲಕನಿಂದ ಮಾಹಿತಿ ಪಡೆದಿದ್ದಾರೆ. ಬಾಲಕ ತಾನು ಕಲಿಯುತ್ತಿದ್ದ ಶಾಲೆಗೆ ಹೋಗಲು ಹೆದರುತ್ತಿದ್ದು ಈ ಬಗ್ಗೆ ಮನೆಯವರ ಮನವಿಯ ಹಿನ್ನಲೆಯಲ್ಲಿ ಆತನಿಗೆ ಬೇರೆ ಶಾಲೆಯಲ್ಲಿ ಕಲಿಯಲು ಅವಕಾಶ ಒದಗಿಸಿರುವುದಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಬಾಲಕನ ಮೇಲೆ ಹಲ್ಲೆಗೆ ಕಾರಣರಾದ ಶಿಕ್ಷಕರಿಗೆ ನೋಟೀಸ್ ನೀಡಲಾಗಿದ್ದು ಅಗತ್ಯ ಕ್ರಮ ಕೈಗೊಳ್ಳೂವುದಾಗಿಯೂ ತಿಳಿಸಿದ್ದಾರೆ.
![](https://i0.wp.com/nesaranewsworld.com/wp-content/uploads/2023/12/WhatsApp-Image-2023-12-01-at-6.50.01-PM.jpeg?resize=1024%2C456&ssl=1)
ದ.ಕ.ಜಿಲ್ಲಾ ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಹೋರಾಟದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸುಮಾರು 500ಕ್ಕೂ ಮಿಕ್ಕಿದ ಪ್ರತಿಭಟನಾಕಾರರು ಸೇರಿದ್ದರು.
ಪ್ರತಿಭಟನೆಯನ್ನು ಜಿಲ್ಲೆಯ ಕಾರ್ಮಿಕ ಮುಖಂಡರಾದ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಸರಕಾರದ ಎಲ್ಲಾ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಹಾಗೂ ಸರಕಾರದ ಪರವಾಗಿ ಬಹಳ ನಿಷ್ಠೆಯಿಂದ ದುಡಿಯುವ ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಕಳೆದ 5 ವರ್ಷಗಳಿಂದ ಪ್ರಾಮಾಣಿಕವಾಗಿ ದುಡಿಯುತ್ತಿದ್ದರೂ,ಸರಕಾರ ಮಾತ್ರ ಅವರ ಬಗ್ಗೆ ಎಳ್ಳಷ್ಟೂ ಕಾಳಜಿಯನ್ನು ವಹಿಸುತ್ತಿಲ್ಲ. ಗೌರವಧನದ ಹೆಸರಿನಲ್ಲಿ 5000, 2500 ರೂ.ನೀಡಿ ದುಡಿಯುವ ಜನತೆಗೆ ಅಗೌರವ ತೋರಿಸುತ್ತಿದೆ. ವಿವಿಧ ರೀತಿಯ ಗ್ಯಾರಂಟಿಗಳನ್ನು ನೀಡುವ ರಾಜ್ಯ ಸರಕಾರ ದುಡಿಯುವ ಜನತೆಗೆ ಬದುಕುವ ಗ್ಯಾರಂಟಿಯನ್ನು ನೀಡದಿರುವುದು ವಿಪರ್ಯಾಸವಾಗಿದೆ.ಎಲ್ಲಾ ನಮೂನೆಯ ಕೆಲಸಗಳನ್ನು ಮಾಡಿಸುವ ಈ ಸರಕಾರಗಳು ಯಾಕೆ ಇಂತಹ ನೌಕರರನ್ನು ಖಾಯಂಗೊಳಿಸುತ್ತಿಲ್ಲ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ. ಇವರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ,ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೆರಾವ್, ಮುತ್ತಿಗೆ ಚಳವಳಿಯಂತಹ ತೀವ್ರ ಹೋರಾಟಗಳನ್ನು ನಡೆಸಬೇಕಾದಿತು ಎಂದು ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಗ್ರಾಮ ಪಂಚಾಯತ್ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸೌಮ್ಯ ಯಶವಂತರವರು ಮಾತನಾಡುತ್ತಾ, ಸರಕಾರದ ಎಲ್ಲಾ ಕೆಲಸಗಳನ್ನು ಮಾಡಿಸುವ ಸರಕಾರ ನಮ್ಮ ಹುದ್ದೆಗಳನ್ನು ಖಾಯಂಗೊಳಿಸಿ ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು. ಮುಖ್ಯ ಪುಸ್ತಕ ಬರಹಗಾರರಿಗೆ ಮಾಸಿಕ ರೂ.20,000 ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮಾಸಿಕ ರೂ.15,000 ವೇತನ ನೀಡಬೇಕು. ಅದರ ಜೊತೆಗೆ ESI, PF, ಸಮವಸ್ತ್ರ, ಗುರುತುಚೀಟಿಗಳನ್ನು ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ನಡೆಸುವ ಈ ಹೋರಾಟಕ್ಕೆ ರಾಜ್ಯ ಸರಕಾರದ ಕೂಡಲೇ ಸ್ಪಂದಿಸುವಂತಾಗಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಒಕ್ಕೂಟದ ಜಿಲ್ಲಾ ನಾಯಕರಾದ ಸಂಧ್ಯಾ ಪುತ್ತೂರು ರವರು ಮುಖ್ಯ ಪುಸ್ತಕ ಬರಹಗಾರರ ಮತ್ತು ಸಂಪನ್ಮೂಲ ವ್ಯಕ್ತಿಗಳ ದಿನನಿತ್ಯದ ನೋವಿನ ಘಟನೆಗಳನ್ನು ಮೆಲುಕು ಹಾಕುತ್ತಾ, ಬೇಡಿಕೆಗಳ ಈಡೇರಿಕೆಗೆ ಸರಕಾರ ಕೂಡಲೇ ಸ್ಪಂದಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯ ನೇತ್ರತ್ವವನ್ನು ಒಕ್ಕೂಟದ ಮುಖಂಡರುಗಳಾದ ಗೀತಾ ಸುಳ್ಯ,ಶೋಭಾ, ಇಂದಿರಾ, ಜಯಂತಿ, ಗೀತಾಂಜಲಿ ಮೂಡಬಿದ್ರೆ, ನಳಿನಾಕ್ಷಿ ಮುನ್ನೂರು ಮುಂತಾದವರು ವಹಿಸಿದ್ದರು. ಪ್ರತಿಭಟನೆಯ ಕೊನೆಯಲ್ಲಿ ಜಿಲ್ಲಾ ಮಟ್ಟದ ನಿಯೋಗವೊಂದು ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಿತು.
![](https://i0.wp.com/nesaranewsworld.com/wp-content/uploads/2023/11/WhatsApp-Image-2023-11-09-at-12.16.18-PM-3.jpeg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2023/11/WhatsApp-Image-2023-09-29-at-10.07.05-1.jpg?resize=724%2C1024&ssl=1)
![](https://i0.wp.com/nesaranewsworld.com/wp-content/uploads/2023/09/WhatsApp-Image-2023-06-19-at-2.49.48-PM-1.jpeg?resize=723%2C1024&ssl=1)