ಕರಿಮಣಿ ಸರ ಕಳ್ಳತನ: ಇಬ್ಬರ ಬಂಧನ

ಶೇರ್ ಮಾಡಿ

ಉದ್ಯೋಗಿಯೊಬ್ಬರು ಸರಕಾರಿ ಬಸ್‌ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸರಕಾರಿ ಉದ್ಯೋಗಿಯಾಗಿರುವ ವಾರಿಜಾ ಅವರು ಡಿ. 12ರಂದು ಸರಕಾರಿ ಬಸ್‌ ಹತ್ತುವ ವೇಳೆ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಈ ಪ್ರಕರಣದ ತನಿಖೆ ನಡೆಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ತಂಡದ ಪೊಲೀಸರು ತಮಿಳುನಾಡು ರಾಜ್ಯದ ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30)ರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಿಂದ ಡಿ. 20ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.

ಆರೋಪಿಗಳ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ಪ್ರಕರಣ ದಾಖಲಾಗಿದ್ದು. ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಇಬ್ಬರು ಆರೋಪಿಗಳನ್ನು ಸಂಜೆ ನ್ಯಾಯಾಧೀಶರ ಬಳಿ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ವೃತ್ತನಿರೀಕ್ಷಕ ನಾಗೇಶ್‌ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಉಪನಿರೀಕ್ಷಕ ಚಂದ್ರಶೇಖರ್‌ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Leave a Reply

error: Content is protected !!