ತುಮಕೂರಿನಲ್ಲಿ ಹತ್ಯೆಗೀಡಾದವರ ಮನೆಗೆ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ

ಶೇರ್ ಮಾಡಿ

ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಸೋಮವಾರ ತುಮಕೂರಿನಲ್ಲಿ ಹತ್ಯಗೀಡಾದ ಬೆಳ್ತಂಗಡಿ ತಾಲೂಕಿನ ಮೂವರು ವ್ಯಕ್ತಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಸೋಮವಾರ ಬೆಳಿಗ್ಗೆ ಬೆಳ್ತಂಗಡಿಗೆ ಆಗಮಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮದ್ದಡ್ಕದ ಇಸಾಕ್ ಮನೆಗೆ, ಶಿರ್ಲಾಲಿನ ಇಮ್ತಿಯಾಜ್ ಯಾನೆ ಸಿದ್ದಿಕ್ ಮನೆಗೆ, ಉಜಿರೆಯ ಶಾಹುಲ್ ಹಮೀದ್ ಅವರ ಮನೆಗೆ ಭೇಟ ನೀಡಿ ಕುಟುಂಬದ ಸದಸ್ಯರುಗಳೊಂದಿಗೆ ಮಾತುಕತೆ ನಡೆಸಿದರು.

ಮಾದ್ಯಮದವರೊಂದಿಗೆ ಮಾತನಾಡಿದ ಯು.ಟಿ ಖಾದರ್ ಅವರು ಇದೊಂದು ಅತ್ಯಂತ ಹೇಯ ಕೃತ್ಯವಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮೃತದೇಹಗಳ ಡಿ.ಎನ್.ಎ ಪರೀಕ್ಷೆ ನಡೆಸಿ ಸಾಧ್ಯವಾದಷ್ಟು ವೇಗವಾಗಿ ಕುಟುಂಬಸ್ಥರಿಗೆ ಹಸ್ತಾಂತರಿಸಲು ಕೋರಿದ್ದೇನೆ. ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಂಡು ಬಳಿಕ ಮೃತದೇಹಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ತಿಳಿಸಿದರು. ಇದೊಂದು ದೊಡ್ಡ ಮೋಸದ ಜಾಲವಾಗಿದ್ದು ಇದರ ಹಿಂದಿರುವವರ ಬಗ್ಗೆ ಸಮಗ್ರವಾದ ತನಿಖೆಯಾಗಿ ಎಲ್ಲರನ್ನೂ ಕಾನೂನಿನ ಮುಂದೆ ತರುವ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಎಲ್ಲ ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಯಾರೂ ಇಂತಹ ಜಾಲಕ್ಕೆ ಬಲಿಯಾಗದಂತೆ ನೋಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರ ಮುಖಂಡರುಗಳು ಇದ್ದರು.

Leave a Reply

error: Content is protected !!