ಜೆಡಿಎಸ್‍ನಿಂದ ಪ್ರಜ್ವಲ್ ರೇವಣ್ಣ ಅಮಾನತು

ಶೇರ್ ಮಾಡಿ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ.

ಕರ್ನಾಟಕದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ.ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜಾ.ದಳ ಮೈತ್ರಿಗೆ ಹಿನ್ನಡೆಯಾಗಬಹುದು ಎನ್ನುವ ಆತಂಕದ ನಡುವೆಯೇ ಇನ್ನಷ್ಟ ಅನಾಹುತ ನಿಯಂತ್ರಿಸಲು ತುರ್ತು ಆದೇಶವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ ಕೂಡ ಪ್ರಜ್ವಲ್‌ ರೇವಣ್ಣ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಕಳೆದ ವಾರ ಹುಬ್ಬಳ್ಳಿಯಲ್ಲಿ ನಡೆದಿದ್ದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಪ್ರಯತ್ನಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪ್ರಜ್ವಲ್‌ ಪ್ರಕರಣದ ಮೂಲಕ ತಿರುಗೇಟು ನೀಡಲು ಮುಂದಾಗಿದೆ. ಈ ಕಾರಣದಿಂದಲೇ ರಾಜಕೀಯವಾಗಿ ಇದು ಪ್ರಬಲಗೊಳ್ಳುವ ಮುನ್ನವೇ ಪ್ರಜ್ವಲ್‌ ವಿರುದ್ದ ಆಗಿದೆ ಎನ್ನುವ ಮಾತು ಜಾತ್ಯತೀತ ಜನತಾದಳ ವಲಯದಲ್ಲಿ ಕೇಳಿ ಬರುತ್ತಿವೆ.

ಎಸ್‌ಐಟಿ ತನಿಖೆ ಚುರುಕು
ಹಾಸನದಲ್ಲಿ ಹಲವಾರು ಮಹಿಳೆಯರ ಮೇಲೆ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ಧಾರೆ ಎನ್ನುವ ದೂರುಗಳು ಕೇಳಿ ಬಂದಿದ್ದವು. ಈ ಬಗ್ಗೆ ದೂರು ಕೂಡ ದಾಖಲಾಗಿದ್ದು, ಮೊಕದ್ದಮೆ ದಾಖಲಿಸಿ ಹಾಸನ ಪೊಲೀಸರು ತನಿಖೆ ಆರಂಭಿಸಿದ್ದರು. ಅಲ್ಲದೇ ಕರ್ನಾಟಕ ಸರ್ಕಾರವೂ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ಎಸ್‌ಐಟಿ ತನಿಖೇಗೆ ವಹಿಸಿದೆ. ಹಿರಿಯ ಪೊಲೀಸ್‌ ಅಧಿಕಾರಿ ಬಿ.ಕೆ. ಸಿಂಗ್‌ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚಿಸಲಾಗಿದ್ದು, ಐಪಿಎಸ್‌ ಅಧಿಕಾರಿಗಳಾದ ಸೀಮಾ ಲಾಟ್ಕರ್‌ ಹಾಗೂ ಡಾ.ಸುಮನಾ ಪನ್ನೇಕರ್‌ ಅವರು ಸಮಿತಿಯಲ್ಲಿದ್ದಾರೆ. ಈ ತಂಡವೂ ಈಗಾಗಲೇ ತನಿಖೆಯನ್ನು ಚುರುಕುಗೊಳಿಸಿದೆ.

ಕ್ರಮಕ್ಕೆ ಶಾಸಕ ಪತ್ರ
ಪ್ರಜ್ವಲ್‌ ರೇವಣ್ಣ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಅವರದ್ದೇ ಪಕ್ಷದ ಶಾಸಕ ಹಾಗೂ ಯುವ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಶರಣುಗೌಡ ಕಂದಕೂರ ಪತ್ರ ಬರೆದಿದ್ದರು. ಪಕ್ಷದ ಹಿತದೃಷ್ಟಿಯಿಂದ ಪ್ರಜ್ವಲ್‌ ವಿರುದ್ದ ಕ್ರಮ ತೆಗೆದುಕೊಂಡು ಪಕ್ಷದಿಂದ ಹೊರಹಾಕಿ. ಪಕ್ಷದ ನೈತಿಕತೆ ಹೆಚ್ಚಿಸಿ ಎನ್ನುವ ಒತ್ತಾಯವನ್ನು ಅವರು ಮಾಡಿದ್ದರು.

Leave a Reply

error: Content is protected !!