


ನೆಲ್ಯಾಡಿ:ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಇಂದು(ಜೂ.16) ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡವರ ಪೈಕಿ ಶಂಕರನಾರಾಯಣ ಭಟ್ (41), ಕಾರ್ಕಳದ ಪಡುಮನೆ ನಿವಾಸಿಯಾಗಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಮೃತರಾಗಿದ್ದಾರೆ. ಈ ಪೈಕಿ ಐವರು ಗಂಭೀರ ಗಾಯಗೊಂಡಿದ್ದು, ತಕ್ಷಣ 5 ಮಂದಿ ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ 4 ಮಂದಿ ಇಂಡಿಯನ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕೆಲವರನ್ನು ಪುತ್ತೂರಿನ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.








