



ನೆಲ್ಯಾಡಿ: ಜ್ಞಾನೋದಯ ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರದಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಮಾಹಿತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಪನ್ಮೂಲ ವ್ಯಕ್ತಿ ಉಜಿರೆ ಜೀನಿಯಸ್ ಕೋಚಿಂಗ್ ಸೆಂಟರ್ ಮಾಲತಿ ಸ್ವಸ್ತಿಕ ಜೈನ್ ಅವರು ವಿಜ್ಞಾನ ವಿಭಾಗವನ್ನು ಆಯ್ದುಕೊಂಡ ವಿದ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಚಯ ನೀಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಮೋಹದಿಂದ ದೂರವಿದ್ದು ಪಾಠಕ್ಕೆ ಹೆಚ್ಚು ಗಮನ ನೀಡಬೇಕು ಎಂದು ಸಲಹೆ ನೀಡಿದರು. ಶಿಸ್ತಿನಿಂದ ಓದಿದರೆ ಉತ್ತಮ ಅಂಕ ಗಳಿಸಿ ಉನ್ನತ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಬಹುದು ಎಂಬ ಕಿವಿಮಾತು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಚಾರ್ಯ ರೆ.ಫಾ.ಡಾ.ವರ್ಗೀಸ್ ಕೈಪನಡ್ಕ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಲ್ಲಿ ಶಿಸ್ತನ್ನು ಪಾಲಿಸುತ್ತಾ ಶಿಕ್ಷಣದ ಹಂತಗಳಲ್ಲಿ ಗಮನವಿಟ್ಟು ನಡಿಗೆಯಿಟ್ಟರೆ ಜೀವನದಲ್ಲಿ ಉತ್ತಮ ಸಾಧನೆ ಸಾಧ್ಯವೆಂದರು. ತರಗತಿಯಲ್ಲಿ ಗಮನವಿಟ್ಟು ಓದಿದರೆ ಭವಿಷ್ಯ ಉಜ್ವಲವಾಗಿರುತ್ತದೆ ಎಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ಉಪನ್ಯಾಸಕ ಸುಶೀಲ್ ಕುಮಾರ್ ಸ್ವಾಗತಿಸಿದರು, ಉಪನ್ಯಾಸಕಿ ಮಮತಾ ಡಿ ಕಾರ್ಯಕ್ರಮ ನಿರೂಪಿಸಿದರು, ಶಿಕ್ಷಕ ಜೋಸ್ ಪ್ರಕಾಶ್ ವಂದಿಸಿದರು.







