



ಬಿ.ಸಿ.ರೋಡ್ : ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರು ಕೂಡ ಸಾವನ್ನಪಿರುವ ಹೃದಯ ವಿದ್ರಾವಕ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (52) ಹಾಗೂ ಅವರ ಪತ್ನಿ ಜಯಂತಿ (45) ಮೃತಪಟ್ಟವರು.
ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಪತ್ನಿ ಜಯಂತಿ ರವರಿಗೆ ಹಲ್ಲೆ ಮಾಡಿ, ಕತ್ತು ಹಿಚುಕಿ ಸಾಯಿಸಿರುತ್ತಾನೆ. ನಂತರ ತಿಮ್ಮಪ್ಪನು ಕೂಡಾ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮೃತರ ತಿಮ್ಮಪ್ಪರವರ ಸಹೋದರ ವಿಶ್ವನಾಥ ಮತ್ತು ಮೃತ ಜಯಂತಿಯವರ ಸೋದರಿ ಸುಜಾತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಗುರುವಾರ ಬೆಳಿಗ್ಗೆ ಜಯಂತಿಯವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದನ್ನು ಸ್ಥಳೀಯರು ಗಮನಿಸಿದ್ದಾರೆ.
ಮದುವೆಯಾಗಿ ಸುಮಾರು 16 ವರ್ಷಗಳ ನಂತರ ಜಯಂತಿ ಅವರು ಗರ್ಭಿಣಿಯಾಗಿದ್ದು, ಜುಲೈ 2ರಂದು ಸೀಮಂತ ದಿನ ನಿಗದಿಯಾಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.







