

ನೆಲ್ಯಾಡಿ: ಮಿನಿ ಗೂಡ್ಸ್ ಗಾಡಿ ಮತ್ತು ಕಾರುಗಳ ನಡುವೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯ ಗ್ರಾಮದ ಪರ್ಕಳ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ನಿನ್ನೆಯೂ ಕೂಡ ಇದೇ ಪ್ರದೇಶದಲ್ಲಿ ಎರಡು ಅಪಘಾತಗಳು ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಹಾಸನದಿಂದ ಉಡುಪಿಗೆ ಬರುತ್ತಿದ್ದ ಉದ್ಯಮಿ ಆಹಿಲ್ ಪಿರ್ ದೋಸ್ ಎಂಬವರು ಚಲಿಸುತ್ತಿದ್ದ ಕಾರು ಹಾಗೂ ಉಡುಪಿಯಿಂದ ಆಂಧ್ರದತ್ತ ಮೀನನ್ನು ಸಾಗಿಸುತ್ತಿದ್ದ ಇರ್ಷಾದ್ ಎಂಬವರು ಚಲಾಯಿಸುತ್ತಿದ್ದ ಮಿನಿ ಗೂಡ್ಸ್ ಗಾಡಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾವುದೇ ರೀತಿಯಾದ ಪ್ರಾಣಹಾನಿ ಸಂಭವಿಸಿಲ್ಲ. ಎರಡು ವಾಹನಗಳು ಜಖಂಗೊಂಡಿವೆ.
ಸ್ಥಳಕ್ಕೆ 112 ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆದ್ದಾರಿ ಕಾಮಗಾರಿ ನಡೆಯುವ ವೇಳೆ ಯಾವುದೇ ಸೂಚನಾ ಫಲಕವನ್ನು ಹಾಕದೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶವನ್ನು ನೀಡಿರುವುದೇ ಈ ಅಪಘಾತಕ್ಕೆ ಮುಖ್ಯ ಕಾರಣವಾಗಿದೆ.
ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಅಪಘಾತಗಳು ನಡೆಯುತ್ತಲೇ ಇದೆ. ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸಾರ್ವಜನಿಕರು ಹಲವಾರು ಬಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರಾಜಕೀಯ ಮುಖಂಡರಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಪ್ರತಿಫಲ ಶೂನ್ಯ. ಈ ಹಿಂದೆ ಜುಲೈ 31ರಂದು ಸಾರ್ವಜನಿಕರು ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಈ ಮಧ್ಯೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಅವರು ಘಟನೆ ಕುರಿತು ಸ್ಥಳಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಮತ್ತು ಸಂಬಂಧಪಟ್ಟ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ ಸಾರ್ವಜನಿಕರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.










