

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡಬಿದ್ರೆ, ಬಂಟ್ವಾಳ, ಸುರತ್ಕಲ್, ಉಳ್ಳಾಲ ಹಾಗೂ ಬೆಳ್ತಂಗಡಿ ತಾಲ್ಲೂಕುಗಳಿಂದ ಸುಮಾರು ಐದು ಸಾವಿರಕ್ಕೂ ಹೆಚ್ಚು ಭಕ್ತರು ಮತ್ತು ಅಭಿಮಾನಿಗಳು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡಿದರು.

ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಎಲ್ಲರೂ ದೇವಸ್ಥಾನದ ಎದುರು ಸಾಮೂಹಿಕವಾಗಿ “ಶಿವಪಂಚಾಕ್ಷರಿ ಪಠಣ” ಮಾಡಿ ನಂತರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, “ದೇವರ ಅನುಗ್ರಹದಿಂದ ಸತ್ಯದ ಅನಾವರಣವಾಗುತ್ತಿರುವುದು ಸಂತಸದ ವಿಷಯ. ಭಕ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಶ್ರದ್ಧಾ-ಭಕ್ತಿ ನಮ್ಮ ಸೇವಾ ಕಾರ್ಯಗಳಿಗೆ ಉತ್ಸಾಹ ತುಂಬುತ್ತಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಶಾಸಕರುಗಳಾದ ಹರೀಶ್ ಪೂಂಜ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ರಾಜೇಶ್ ನಾಯಕ್, ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷ ಸತೀಶ್ ಕುಂಪಲ, ಹರಿಕೃಷ್ಣ ಬಂಟ್ವಾಳ, ಡಾ. ಎಮ್. ಮೋಹನ ಆಳ್ವ, ಕೆ.ಪಿ. ಜಗದೀಶ್ ಅಧಿಕಾರಿ, ವಕೀಲ ಬಾಹುಬಲಿ ಪ್ರಸಾದ್, ಕೃಷ್ಣರಾಜ ಹೆಗ್ಡೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.











