

ವಿಟ್ಲ: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಅವರು ಲಂಚ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ನಡೆದಿದೆ.
2024ರಲ್ಲಿ ಪೆರುವಾಯಿ ಗ್ರಾಮ ಪಂಚಾಯಿತಿಗೆ ಸರಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಅಡಿಯಲ್ಲಿ ಬೋರ್ವೆಲ್ ಹಾಕಿಕೊಡುವಂತೆ ಫಲಾನುಭವಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಆದರೆ ಹಲವು ಬಾರಿ ಕಚೇರಿಗೆ ಹೋದರೂ ಸರಿಯಾದ ಪ್ರತಿಕ್ರಿಯೆ ಸಿಗದೆ, ಬೆಂಗಳೂರು ಆಫೀಸ್ಗೆ ₹10,000 ಕೊಟ್ಟರೆ ಕೆಲಸ ಪಾಸ್ ಮಾಡಿಸುತ್ತೇನೆ, ನಾನು ಸ್ವತಃ ಹೋಗಿ ಮಾಡಿಸುತ್ತೇನೆ ಎಂದು ಪಂಚಾಯತ್ ಅಧ್ಯಕ್ಷೆ ಬೇಡಿಕೆ ಇಟ್ಟಿದ್ದರು.
ಅಧ್ಯಕ್ಷೆ ನಫೀಸಾ ಹಾಗೂ ಬಿಲ್ ಕಲೆಕ್ಟರ್ ವಿಲಿಯಂ ಇವರಿಬ್ಬರೂ ₹10,000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದರು. ಆರೋಪಿಗಳ ವಿರುದ್ಧ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆಯನ್ನು ಮಂಗಳೂರು ಲೋಕಾಯುಕ್ತ ಎಸ್ಪಿ ಪ್ರಭಾರ ಕುಮಾರ್ ಚಂದ್ರ ನೇತೃತ್ವದಲ್ಲಿ ಡಿವೈಎಸ್ಪಿ ಡಾ. ಗಾನ ಪಿ.ಕುಮಾರ್, ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಪಿ., ಭಾರತಿ, ಚಂದ್ರಶೇಖರ್ ಕೆ.ಎನ್., ರವಿ ಪವರ್ ಹಾಗೂ ಸಿಬ್ಬಂದಿ ಮಹೇಶ್ ರಾಜಪ್ಪ, ರಾಧಾಕೃಷ್ಣ, ಆದರ್ಶ್, ರಾಮ ನಾಯ್ಕ, ವಿವೇಕ್ ಪ್ರವೀಣ್, ಗಂಗಣ್ಣ, ನಾಗಪ್ಪ, ಮಹಾದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಸೇರಿ ತಂಡ ಪಾಲ್ಗೊಂಡಿತ್ತು.






