

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿಯಲ್ಲಿ 2025-26ನೇ ಸಾಲಿನ ಲಲಿತಾ ಕಲಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಆಯ್ಕೆ ಸ್ಪರ್ಧೆ ಕಾರ್ಯಕ್ರಮವು ಸೋಮವಾರ ದಂದು ಜರುಗಿತು.
ಡಾ.ಸೀತಾರಾಮ ಪಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯಕ್ತಿಯ ಮತ್ತು ಸಮಾಜದ ಸರ್ವತೋಮುಖ ಸಕಾರಾತ್ಮಕ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ವಿಭಿನ್ನತೆಯ ಅಸ್ಮಿತೆಯ ಉಳಿವು ಅತ್ಯಗತ್ಯ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಇತಿಹಾಸ ಉಪನ್ಯಾಸಕ, ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ವಿಜೇತ ವಿಶ್ವನಾಥ ಶೆಟ್ಟಿ ಉದ್ಘಾಟನಾ ನುಡಿಗಳನ್ನಾಡಿ, ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವವನ್ನು ನಿದರ್ಶನಗಳೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಭವಿಷ್ಯದ ಸಶಕ್ತ ಬದುಕಿಗಾಗಿ ಕೌಶಲ್ಯಾಭಿವೃದ್ಧಿ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಇಂತಹ ಚಟುವಟಿಕೆಗಳು ವೇದಿಕೆ ಆಗುತ್ತವೆ ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.
ಲಲಿತಾ ಕಲಾ ಸಂಘದ ಸಂಚಾಲಕಿ ಪಾವನ ರೈ ಸ್ವಾಗತಿಸಿದರು, ಕುಮಾರಿ ಕೈರುನ್ನಿಸಾ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಚಂದ್ರಕಲಾ ವಂದಿಸಿದರು. ನಂತರ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಸ್ಪರ್ಧೆಗಳು ಜರುಗಿದವು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.






