


ಕೌಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕಟ್ಟೆಮಜಲು ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮವು ಮಂಗಳವಾರದಂದು ಕೌಕ್ರಾಡಿಯ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಯಶಸ್ವಿಯಾಗಿ ನಡೆಯಿತು.
ದೈವಸ್ಥಾನದ ಆವರಣ, ಸುತ್ತಮುತ್ತಲ ಪ್ರದೇಶ ಹಾಗೂ ಭಕ್ತರು ಸೇರುವ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಹಾಗೂ ಶ್ರದ್ಧಾ ಕೇಂದ್ರದ ಪಾವಿತ್ರ್ಯ ಕಾಪಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಸದಸ್ಯೆ ಗೀತಾ, ದೈವಸ್ಥಾನದ ಆಡಳಿತ ಮೊಕ್ತೇಸ ವಿಶ್ವನಾಥ, ಸಮಿತಿಯ ಅಧ್ಯಕ್ಷ ಹರೀಶ್ ಪಿ. ಅವರು ಭಾಗವಹಿಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಗಣ್ಯರು, ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ಪ್ರತಿಯೊಬ್ಬರ ಹೊಣೆಗಾರಿಕೆಯಾಗಿದೆ. ಇಂತಹ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಬೆಳೆಸಲು ಸಹಕಾರಿಯಾಗುತ್ತದೆ ಎಂದರು.
ಚಾಮುಂಡೇಶ್ವರಿ ಭಜನಾ ಮಂಡಳಿಯ ಸದಸ್ಯರು, ಸೇವಾಪ್ರತಿನಿಧಿಗಳು ಹಾಗೂ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಸಕ್ರಿಯವಾಗಿ ಕೈಜೋಡಿಸಿ ಶ್ರಮದಾನ ಮಾಡಿದರು.






