


ಸುಬ್ರಹ್ಮಣ್ಯ: ಮೈಸೂರಿನ ಲೋಕಸಭಾ ಸದಸ್ಯ ಯದುವೀರ ದತ್ತ ಒಡೆಯರ್ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸುಬ್ರಹ್ಮಣ್ಯ ಮಠದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ವಿದ್ವತ್ ಸಮ್ಮೇಳನ ವಿಶ್ವ ಸಂಭ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಆಗಮಿಸಿದ್ದ ಸಂಸದರು, ಈ ಸಂದರ್ಭ ಕುಕ್ಕೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಪರವಾಗಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅವರು ಸಂಸದರನ್ನು ಪೂರ್ಣ ಕುಂಭ ಸ್ವಾಗತದೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಸಂಸದ ಯದುವೀರ ದತ್ತ ಒಡೆಯರ್ ಅವರು ಶ್ರೀ ದೇವಳದಲ್ಲಿ ಫಲಹಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಶಿಷ್ಟಾಚಾರ ವಿಭಾಗದ ಜಯರಾಮ ರಾವ್, ಪ್ರಮೋದ್, ಗೋಪಿನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅನ್ನಪ್ರಸಾದಕ್ಕೆ ವಿಶೇಷ ವ್ಯವಸ್ಥೆ:
ಭಕ್ತರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಮಧ್ಯಾಹ್ನದ ಅನ್ನಪ್ರಸಾದ ವ್ಯವಸ್ಥೆಯನ್ನು ಮುಖ್ಯ ಅನ್ನಪ್ರಸಾದ ಭೋಜನ ಶಾಲೆಯ ಜೊತೆಗೆ ಆದಿ ಸುಬ್ರಹ್ಮಣ್ಯದ ಭೋಜನ ಶಾಲೆಯಲ್ಲಿಯೂ ಬಫೆ ವ್ಯವಸ್ಥೆಯೊಂದಿಗೆ ಕಲ್ಪಿಸಲಾಗಿತ್ತು. ಸಾವಿರಾರು ಭಕ್ತರು ಶಿಸ್ತುಬದ್ಧವಾಗಿ ಅನ್ನಪ್ರಸಾದ ಸ್ವೀಕರಿಸಿದರು.





