





ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಡಬ ತಾಲೂಕು ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡರು. ದೇವಸ್ಥಾನದ ಆವರಣದಲ್ಲಿ ಬಾಗಿದ ಮರಗಳನ್ನು ತೆರವುಗೊಳಿಸುವುದರ ಜೊತೆಗೆ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಸ್ವಯಂಸೇವಕರು ನಡೆಸಿದರು. ಬಳಿಕ ದೇವಸ್ಥಾನದ ಆವರಣದಲ್ಲಿ ಮಾರ್ಚ್ ತಿಂಗಳ ಮಾಸಿಕ ಸಭೆ ನಡೆಯಿತು.
ಸಭೆಗೆ ಶೌರ್ಯ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ವಲಯ ಮೇಲ್ವಿಚಾರಕ ಆನಂದ ಡಿ.ಬಿ. ಅವರು ಉಪಸ್ಥಿತರಿದ್ದು ಸ್ವಯಂಸೇವಕರಿಗೆ ಸೂಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸತೀಶ್ ಕೆ.ಎಸ್. ಅವರು ಉಪಸ್ಥಿತರಿದ್ದು, ಮಾ.8ರಂದು ಆದಿತ್ಯವಾರ ನಡೆಯಲಿರುವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸುವಂತೆ ಮನವಿ ಮಾಡಿದರು. ಅಲ್ಲದೆ ಶ್ರಮದಾನದಲ್ಲಿ ಪಾಲ್ಗೊಂಡ ಎಲ್ಲಾ ಸ್ವಯಂಸೇವಕರಿಗೆ ಕೃತಜ್ಞತೆ ಸಲ್ಲಿಸಿದರು.
ಸಭೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುಬ್ರಹ್ಮಣ್ಯ ಶಬರಾಯ, ದೇವಸ್ಥಾನದ ಸಮಿತಿಯ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಗೌಡ ಪೂವಾಜೆ, ಜೊತೆ ಕಾರ್ಯದರ್ಶಿ ಶಿವಪ್ರಸಾದ್, ಪ್ರಗತಿಪರ ಕೃಷಿಕ ರಾಮಚಂದ್ರ ಶೆಟ್ಟಿ, ಕೌಕ್ರಾಡಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ಸೇರಿದಂತೆ ಘಟಕದ ಸ್ವಯಂಸೇವಕರಾದ ಜೋಬಿ ಮತ್ತಾಯಿ, ಸಂತೋಷ್ ಕುಮಾರ್, ರಮೇಶ್ ಬಿ., ಪದ್ಮಕುಮಾರ್, ಚಂದ್ರ ಕೆ.ಎನ್., ಗೀತಾ, ಜಯಂತಿ ಮತ್ತಿತರರು ಉಪಸ್ಥಿತರಿದ್ದರು.
ಘಟಕ ಸಂಯೋಜಕಿ ನಮಿತಾ ಎಸ್. ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು. ಘಟಕದ ಸ್ವಯಂಸೇವಕಿ ಕುಸುಮ ವಂದಿಸಿದರು.





