ಉಚಿತ ಟ್ಯೂಷನ್ ಕ್ಲಾಸ್ ಸಮಾರೋಪ

ಶೇರ್ ಮಾಡಿ

ಕೊಣಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಡಬ ತಾಲೂಕು ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಕೊಣಾಲು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕಳೆದ ಮೂರು ತಿಂಗಳಿನಿಂದ ನಡೆಸಲಾಗುತ್ತಿದ್ದ ಉಚಿತ ಟ್ಯೂಷನ್ ಕ್ಲಾಸ್‌ನ ಸಮಾರೋಪ ಸಮಾರಂಭವು ಶಾಲಾ ಆವರಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕ ಶಶಿಧರ್ ಶೆಟ್ಟಿ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್‌ಗಳನ್ನು ಒದಗಿಸಿರುವುದು ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನಕಾರಿ ಆಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ಜೊತೆಗೆ ಸರಕಾರಿ ಶಾಲೆಗಳ ಅಭಿವೃದ್ಧಿಗೂ ಈ ರೀತಿಯ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಜೇಸಿಐ ನ ಪೂರ್ವ ಅಧ್ಯಕ್ಷೆ ಸುಚಿತ್ರ ಅವರು ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹೇಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡಿದರು. ಜೊತೆಗೆ ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಪ್ರೋತ್ಸಾಹವೂ ಅತ್ಯಂತ ಅಗತ್ಯವಾಗಿದ್ದು, ಮಕ್ಕಳ ಭವಿಷ್ಯದ ಕನಸುಗಳು ಹಾಗೂ ಪೋಷಕರ ನಿರೀಕ್ಷೆಗಳು ಒಂದೇ ದಿಕ್ಕಿನಲ್ಲಿ ಸಾಗಲು ಪರಸ್ಪರ ಸಹಕಾರ ಅಗತ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಉಚಿತ ಟ್ಯೂಷನ್ ಕ್ಲಾಸ್ ಮೂಲಕ ಸಿಕ್ಕಿರುವ ಸೌಲಭ್ಯ ಹಾಗೂ ಅದರ ಪ್ರಯೋಜನಗಳ ಕುರಿತು ತನ್ನ ಅನಿಸಿಕೆಗಳನ್ನು ಹಂಚಿಕೊಂಡರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಅವರು ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ರಮಣಿ, ಒಕ್ಕೂಟದ ಅಧ್ಯಕ್ಷ ಲಿತಿನ್, ಎಸ್‌ಡಿಎಂಸಿ ಅಧ್ಯಕ್ಷ ಕಮಲಾಕ್ಷ, ಟ್ಯೂಷನ್ ಶಿಕ್ಷಕಿ ಸಂಧ್ಯಾ ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕ ಬಾಲಕೃಷ್ಣ ಸ್ವಾಗತಿಸಿದರು. ಶಿಕ್ಷಕ ಶಾಂತ ರಾಮ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ನೀರಜಾ ಧನ್ಯವಾದ ಅರ್ಪಿಸಿದರು.

ಶಾಲಾ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೇವಾ ಪ್ರತಿನಿಧಿ ಪ್ರತಿಮಾ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Leave a Reply

error: Content is protected !!