





ಕಡಬ: ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿ. ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಕಡಬ ತಾಲೂಕು ಅಧ್ಯಕ್ಷರಾದ ಸುಂದರ ಗೌಡ ಬಿಳಿನೆಲೆ ಅವರು ಈ ಕುರಿತು ದೂರು ನೀಡಿದ್ದು, ಬೆಳಂದೂರು ಗ್ರಾಮದಲ್ಲಿ ವಾಸವಾಗಿರುವ ಅರಣ್ಯ ಅಧಿಕಾರಿಯಾದ ಸಂಜೀವ ಪೂಜಾರಿ ಎಂಬವರು ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ “ಸಂಜೀವ ಪೂಜಾರಿ ಕಾಣಿಯೂರು” ಎಂಬ ಖಾತೆ ಮೂಲಕ ಭಜನೆ ಹಾಗೂ ಭಜಕರ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸಿಕೊಂಡು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಹಿಂದೂ ಭಕ್ತರು ಶ್ರದ್ಧಾಭಕ್ತಿಯಿಂದ ಆರಾಧನೆ ಮಾಡುವ ಭಜನೆ ಪರಂಪರೆಯನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆಗಳನ್ನು ನೀಡಿದ್ದು, ವಿಶೇಷವಾಗಿ ಮಹಿಳೆಯರ ಕುಣಿತ ಭಜನೆ ಕುರಿತು ಕೀಳುಮಟ್ಟದ ಪದಗಳನ್ನು ಬಳಸಿ ಪೋಸ್ಟ್ ಹಂಚಿಕೊಂಡಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ಸಾಮಾಜಿಕ ಶಾಂತಿಯ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಂಜೀವ ಪೂಜಾರಿ ಈ ಹಿಂದೆ ಸಹ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾಗಿ ಹೇಳಲಾಗಿದ್ದು, ಇಂತಹ ನಡೆಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಆದ್ದರಿಂದ ಸಂಬಂಧಪಟ್ಟ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ, ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ದೂರುದಾರರು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ನ ಪ್ರಮೋದ್, ಸತ್ಯನಾರಾಯಣ ಹೆಗಡೆ ತಾಲ್ಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ, ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್, ಪ್ರಕಾಶ್ ಕುಮಾರ್ ಉಪಸ್ಥಿತರಿದ್ದರು.




