ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳ್ಳತನ; 13 ಲಕ್ಷ ಮೌಲ್ಯದ ಚಿನ್ನಾಭರಣ, ₹1 ಲಕ್ಷ ನಗದು ದೋಚಿದ ಕಳ್ಳರು

ಶೇರ್ ಮಾಡಿ

 

ಪದ್ಮುಂಜ: ಇಲ್ಲಿನ ಗಾಡಕೋಡಿ ಎಂಬಲ್ಲಿ ಬೆಳ್ತಂಗಡಿ ಪೊಲೀಸ್ ಇಲಾಖೆಯ ಸಿಬ್ಬಂದಿ ಕರುಣಾಕರ ಗೌಡ ಅವರ ಮನೆಯಲ್ಲಿ ಮೇ 14ರ ರಾತ್ರಿ ಕಳ್ಳತನ ನಡೆದಿದ್ದು, ಸುಮಾರು ₹13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹1 ಲಕ್ಷ ನಗದು ಕಳ್ಳತನವಾಗಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರುಣಾಕರ ಗೌಡ ಅವರು ಮನೆಯಲ್ಲಿ ಒಬ್ಬರೇ ವಾಸವಾಗಿದ್ದು, ಪತ್ನಿ ಹಾಗೂ ಮಕ್ಕಳು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೇ 14ರ ರಾತ್ರಿ ಸುಮಾರು 1 ಗಂಟೆಯವರೆಗೆ ಎಚ್ಚರವಾಗಿದ್ದ ಕರುಣಾಕರ ಗೌಡರು ಬಳಿಕ ನಿದ್ರೆಗೆ ಜಾರಿದ್ದರು. ಬೆಳಿಗ್ಗೆ ಸುಮಾರು 7.30ರ ವೇಳೆಗೆ ಎದ್ದು ನೋಡಿದಾಗ ಮನೆಯ ಬಾಗಿಲಿನ ಚಿಲಕ ತೆರೆದಿರುವುದು ಗಮನಕ್ಕೆ ಬಂದಿದ್ದು, ಅನುಮಾನಗೊಂಡು ಮನೆಯೊಳಗೆ ಪರಿಶೀಲನೆ ನಡೆಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ, ಉಪ್ಪಿನಂಗಡಿ ಠಾಣಾಧಿಕಾರಿ ಕೌಶಿಕ್ ಬಿ.ಸಿ. ಹಾಗೂ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

 

Leave a Reply

error: Content is protected !!