ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ವಿಶೇಷ ಕಾರ್ಯಾಗಾರ

ಶೇರ್ ಮಾಡಿ

 

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯಲ್ಲಿ ಪಾಲಕತ್ವ ಕುರಿತು ವಿಶೇಷ ಕಾರ್ಯಾಗಾರ

ನೆಲ್ಯಾಡಿ: ನೂಜಿಬಾಳ್ತಿಲ ಬೆಥನಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಮೊದಲ ಪಾಲಕರ ಸಮಾವೇಶವನ್ನು ಹಾಗೂ ಪಾಲಕತ್ವ ಕುರಿತು ವಿಶೇಷ ಕಾರ್ಯಾಗಾರ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಲಕ್ಷ್ಮಣ ಗೌಡ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಭೆಯಲ್ಲಿ 2026–27ನೇ ಸಾಲಿನ ನೂತನ ಶಿಕ್ಷಕ-ರಕ್ಷಕ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ನಂದ ಅವರು ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಸೇವೆ ಸಲ್ಲಿಸಿದ್ದ ಲಕ್ಷ್ಮಣ ಗೌಡ ಹಾಗೂ ಭಾರತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಪಾಲಕರಿಗಾಗಿ ಆಯೋಜಿಸಲಾದ ‘ಪರಿಣಾಮಕಾರಿ ಪಾಲಕತ್ವ’ ವಿಷಯದ ವಿಶೇಷ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರದಲ್ಲಿ ಸಿ.ಆಲ್ಫಿಯಾ ಹಾಗೂ ಸಿ.ಬ್ಲೆಸ್ಸಿ ಅವರು ಉಪನ್ಯಾಸ ನೀಡಿ, ಮಕ್ಕಳ ಶಿಕ್ಷಣ, ವ್ಯಕ್ತಿತ್ವ ವಿಕಸನ ಹಾಗೂ ಪಾಲಕರ ಜವಾಬ್ದಾರಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಸುಮಾರು 200ಕ್ಕೂ ಅಧಿಕ ಪಾಲಕರು ಕಾರ್ಯಾಗಾರದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ವ್ಯವಸ್ಥಾಪಕರಾದ ರೆ.ಫಾ. ಆಂಟೋನಿ ಪಡಿಪುರಕ್ಕಲ್ ವಹಿಸಿ ಶುಭ ಹಾರೈಸಿದರು.

ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕೆ. ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾಚಾರ್ಯ ಜಾರ್ಜ್ ಟಿ.ಎಸ್. ಅವರು ಶೈಕ್ಷಣಿಕ ಮಾಹಿತಿಯನ್ನು ನೀಡಿ ಪಾಲಕರನ್ನು ಸ್ವಾಗತಿಸಿದರು. ಮುಖ್ಯಶಿಕ್ಷಕ ತೋಮಸ್ ಎ.ಕೆ. ವಂದಿಸಿದರು. ಉಪನ್ಯಾಸಕಿ ಬೀನಾ ಜಾರ್ಜ್ ಕಾರ್ಯಕ್ರಮ ನಿರೂಪಿಸಿದರು

ಶಿಕ್ಷಕರು, ಸಿಬ್ಬಂದಿ ಹಾಗೂ ಪಾಲಕರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

 

Leave a Reply

error: Content is protected !!