










ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳಿ ಸಮೀಪ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದು ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಕಾರು ಚಾಲಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ಮಧ್ಯಾಹ್ನ ಸುಮಾರು 1.15ರ ವೇಳೆಗೆ ಮಂಗಳೂರಿನಿಂದ ಡೀಸೆಲ್ ತುಂಬಿಸಿಕೊಂಡು ಹೊಸಪೇಟೆಗೆ ತೆರಳಿ ವಾಪಸ್ ಮಂಗಳೂರು ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿಯನ್ನು ಚಾಲಕ ಮೋಹಿತ್ ಕುಮಾರ್ ಚಲಾಯಿಸುತ್ತಿದ್ದರು. ಶಿರಾಡಿ ಗ್ರಾಮದ ಬರ್ಚಿನಹಳ್ಳಿ ಸಮೀಪದ ತಿರುವು ರಸ್ತೆಗೆ ತಲುಪಿದ ವೇಳೆ ಎದುರಿನಿಂದ ಸಕಲೇಶಪುರದ ಕಡೆಗೆ ಸಾಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಬಂದು ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅಪಘಾತದ ಪರಿಣಾಮ ಕಾರು ಚಾಲಕ ಸಕಲೇಶಪುರ ನಿವಾಸಿ ಸಂಜಯ್ ಕುಮಾರ್ (34) ಅವರ ತಲೆಗೆ ರಕ್ತಗಾಯವಾಗಿದ್ದು, ಕಾರಿನಲ್ಲಿದ್ದ ಮೋನಪ್ಪ(56), ಸುರೇಶ್(39) ಹಾಗೂ ಲಲಿತಾ (45) ಅವರು ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಸಾರ್ವಜನಿಕರು ಹಾಗೂ ಟ್ಯಾಂಕರ್ ಚಾಲಕರು ಗಾಯಾಳುಗಳಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಆಂಬುಲೆನ್ಸ್ ಮೂಲಕ ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿದರು.
ಅಪಘಾತದಲ್ಲಿ ಕಾರು ಹಾಗೂ ಟ್ಯಾಂಕರ್ ಎರಡೂ ವಾಹನಗಳು ಜಖಂಗೊಂಡಿವೆ. ಟ್ಯಾಂಕರ್ ಚಾಲಕ ಮೋಹಿತ್ ಕುಮಾರ್ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಸಂಜಯ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆ:
ಅಪಘಾತ ಸಂಭವಿಸಿದ ಸಮಯದಲ್ಲಿ ವಾರಾಂತ್ಯ ಹಾಗೂ ಸರಣಿ ರಜೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ತೆರಳುತ್ತಿದ್ದ ಭಕ್ತರ ವಾಹನಗಳ ಸಂಖ್ಯೆ ಹೆಚ್ಚಿದ್ದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ನಡುವೆ ಬರ್ಚಿನಹಳ್ಳಿ ಬಳಿ ಹೆದ್ದಾರಿ ಮಧ್ಯೆಯೇ ಅಪಘಾತ ಸಂಭವಿಸಿದ್ದರಿಂದ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ, ಗುಂಡ್ಯದಿಂದ ಶಿರಾಡಿ ಘಾಟ್ವರೆಗೆ ಹಲವು ಕಿಲೋಮೀಟರ್ ದೂರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮಧ್ಯಾಹ್ನದಿಂದ ಸಂಜೆವರೆಗೂ ಪದೇಪದೇ ಟ್ರಾಫಿಕ್ ಜಾಮ್ ಉಂಟಾಗಿ ಯಾತ್ರಿಕರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟು ವಾಹನಗಳ ಸುಗಮ ಸಂಚಾರಕ್ಕೆ ಹರಸಾಹಸಪಟ್ಟು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುತ್ತಿದ್ದರು.



