ಸುಳ್ಯ: ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ

ಶೇರ್ ಮಾಡಿ

 

ಸುಳ್ಯ: ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ

ಸುಳ್ಯ: ದೇಶದಾದ್ಯಂತ ತೂಗು ಸೇತುವೆಗಳ ನಿರ್ಮಾಣದ ಮೂಲಕ “ತೂಗು ಸೇತುವೆಗಳ ಸರದಾರ” ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.

ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ‘ಆಯಶ್ಯಿಲ್ಪ ಇಂಜಿನಿಯರಿಂಗ್ ವರ್ಕ್ಸ್’ ಸ್ಥಾಪಿಸಿದ್ದ ಡಾ.ಗಿರೀಶ್ ಭಾರದ್ವಾಜ್ ಅವರು, ಬಳಿಕ ತೂಗು ಸೇತುವೆಗಳ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನೇ ಆರಂಭಿಸಿದರು. ಕಡಿಮೆ ವೆಚ್ಚದಲ್ಲಿ, ಗ್ರಾಮೀಣ ಪ್ರದೇಶಗಳ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತೂಗು ಸೇತುವೆಗಳನ್ನು ನಿರ್ಮಿಸಿ ದೇಶದಾದ್ಯಂತ ವಿಶಿಷ್ಟ ಗುರುತನ್ನು ಸಂಪಾದಿಸಿದ್ದರು.

ಭಾರತದ ವಿವಿಧ ರಾಜ್ಯಗಳಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಸೇರಿದಂತೆ 140ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿರುವ ಹೆಗ್ಗಳಿಕೆ ಅವರದ್ದಾಗಿದೆ. ಗ್ರಾಮೀಣ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಅವರು ನೀಡಿದ ಅಪೂರ್ವ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರವು 2017ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಿ ಗೌರವಿಸಿತ್ತು.

ಸರಳ ವ್ಯಕ್ತಿತ್ವ, ವಿನೂತನ ಆಲೋಚನೆ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೃತರು ಪತ್ನಿ ದಿವಂಗತ ಉಷಾ, ಪುತ್ರರಾದ ಸುದರ್ಶನ್ ಮತ್ತು ಪತಂಜಲಿ, ಪುತ್ರಿ ರಷ್ಯಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

 

Leave a Reply

error: Content is protected !!