










ನೆಲ್ಯಾಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ವತಿಯಿಂದ 2025–26ನೇ ಸಾಲಿನ ತಾಲೂಕುವಾರು ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ನೀಡಲಾದ ವಾರ್ಷಿಕ ಪ್ರಶಸ್ತಿಗಳಲ್ಲಿ ರಾಮನಗರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘವು ಪುತ್ತೂರು ತಾಲೂಕಿನ ಅತ್ಯುತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಪೈಕಿ ದ್ವಿತೀಯ ಸ್ಥಾನ ಪಡೆದು ಗೌರವಕ್ಕೆ ಪಾತ್ರವಾಗಿದೆ.
ಮಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಘದ ಪರವಾಗಿ ಅಧ್ಯಕ್ಷೆ ರೂಪಾ ಕೊಡಂಗೆ ಹಾಗೂ ಕಾರ್ಯದರ್ಶಿ ಕಮಲ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ಉತ್ತಮ ಆಡಳಿತ, ಸದಸ್ಯರ ಸಹಭಾಗಿತ್ವ ಹಾಗೂ ಹಾಲು ಉತ್ಪಾದನೆಯಲ್ಲಿ ನೀಡಿದ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹಾಲು ಪೂರೈಸುವ ಸದಸ್ಯರ ಮಕ್ಕಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಹ ಮಂಗಳೂರು ಹಾಲು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.
ರಾಮನಗರ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯೆ ಹಾಗೂ ನಿರ್ದೇಶಕಿ ಸೌಮ್ಯ ಸೀತಾರಾಮ ಕಾನಮನೆ ಅವರ ಪುತ್ರಿ ಶ್ರೇಯಾ ಅವರು 2025ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನು ಗಳಿಸಿ ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದು ಅಪೂರ್ವ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು.



